“ಮಕ್ಕಳೇ ಹೊಸ ಜಗತ್ತಿನ ನಿಜವಾದ ಸೃಷ್ಟಿಕರ್ತರು. ಮಕ್ಕಳು ವಿದ್ಯಾರ್ಥಿ ಜೀವನದಲ್ಲಿಯೇ ಉತ್ತಮ ಶಿಕ್ಷಣ ಮತ್ತು ಮೌಲ್ಯಯುತವಾದ ಮಾಹಿತಿ ಯನ್ನು ಪಡೆದರೆ ಉತ್ತಮ ವ್ಯಕ್ತಿತ್ವವನ್ನು ಹೊಂದಲು ಸಾಧ್ಯವಾಗುತ್ತದೆ. ಮಕ್ಕಳು ಮಾನಸಿಕ ಒತ್ತಡಗಳನ್ನು ನಿಭಾಯಿಸಲು ಕಾಲ ಕಾಲಕ್ಕೆ ಮಾರ್ಗದರ್ಶನ ಅಗತ್ಯ ನೀಡಬೇಕು. ಪೋಷಕರು ಪರೀಕ್ಷೆ ಸಮಯದಲ್ಲಿ ಸಾಧ್ಯವಾದಷ್ಟು ಮನೆಯಲ್ಲಿ ಉತ್ತಮ ವಾತಾವರಣ ಕಲ್ಪಿಸಬೇಕು ಮತ್ತು ಮಕ್ಕಳ ಮನಸ್ಸಿನ ಮೇಲೆ ಧನಾತ್ಮಕ ಒತ್ತಡ ಹಾಕಬೇಕು. ಮಕ್ಕಳು ಪರೀಕ್ಷೆ ಸಮೀಪಿಸಿದಂತೆ ಹೆಚ್ಚು ಒತ್ತಡಕ್ಕೆ ಒಳಗಾಗುತ್ತಾರೆ. ಮಕ್ಕಳು ಪರೀಕ್ಷಾ ತಯಾರಿಗೆ ಸಮಯ ಹೊಂದಾಣಿಕೆ ಮಾಡಿಕೊಳ್ಳುವುದು ಬಹಳ ಮುಖ್ಯವಾಗಿರುತ್ತದೆ. ಇದು ಉತ್ತಮ ಫಲಿತಾಂಶವನ್ನು ಪಡೆಯಲು ಸಹಕಾರಿಯಾಗುತ್ತದೆ” ಎಂದು ಖ್ಯಾತ ಮನೋವೈದ್ಯರು, ಸಂಪನ್ಮೂಲ ವ್ಯಕ್ತಿಯಾಗಿರುವ ಡಾ.ವಿರೂಪಾಕ್ಷ ದೇವರಮನೆ ಹೇಳಿದರು. ಅವರು ಯಡಾಡಿ- ಮತ್ಯಾಡಿ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ಪೋಷಕ- ಶಿಕ್ಷಕ ಒರಿಯೆಂಟೇಶನ್ ಕಾರ್ಯಕ್ರಮದಲ್ಲಿ ಮಾತನಾಡಿದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಲಾ ಆಡಳಿತ ಮಂಡಳಿ ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷರಾದ ಡಾ| ರಮೇಶ್ ಶೆಟ್ಟಿ ಮಾತನಾಡುತ್ತಾ, “ಯಾವುದೇ ಒಂದು ಸಂಸ್ಥೆಯ ಪ್ರಗತಿಯಲ್ಲಿ ಪೋಷಕರ ಪಾತ್ರ ಮಹತ್ತರವಾಗಿರುತ್ತದೆ. ಪೋಷಕರು ಶಾಲೆಯ ಎಲ್ಲಾ ಚಟುವಟಿಕೆಗಳಲ್ಲಿ ಸಕ್ರೀಯವಾಗಿ ಭಾಗವಹಿಸಿದಾಗ ಉತ್ತಮ ಯಶಸ್ಸು ಕಾಣಲು ಸಾಧ್ಯವಾಗುತ್ತದೆ” ಎಂದರು. ಶಾಲಾ ಆಡಳಿತ ಮಂಡಳಿಯ ಖಜಾಂಚಿ ಭರತ್ ಶೆಟ್ಟಿಯವರು ಪ್ರಾಸ್ತಾವಿಕವಾಗಿ ಮಾತನಾಡಿದರು.

ಹೃದಯ ಸಂಬಂಧಿ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿರುವ ಶಾಲೆಯ ಒಂದನೇ ತರಗತಿ ವಿದ್ಯಾರ್ಥಿನಿ ತ್ರಿಶಿಕಾಳ ಹೃದಯ ಶಸ್ತ್ರ ಚಿಕಿತ್ಸೆಗೆ ಶಾಲಾ ಆಡಳಿತ ಮಂಡಳಿ, ಪೋಷಕರು ಮತ್ತು ಸಿಬ್ಬಂದಿ ವರ್ಗದವರು ನೀಡಿದ ದೇಣಿಗೆ ಸಹಾಯಧನ ಒಟ್ಟು 3 ಲಕ್ಷ ರೂಪಾಯಿಗಳನ್ನು ವಿದ್ಯಾರ್ಥಿನಿ ತಾಯಿಗೆ ಹಸ್ತಾಂತರಿಸಲಾಯಿತು.
ಕಾರ್ಯಕ್ರಮದಲ್ಲಿ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕ ಪ್ರದೀಪ್ ಕೆ ಉಪಸ್ಥಿತರಿದ್ದರು. ಸಹಶಿಕ್ಷಕಿ ಪ್ರೇಮ ನಿರೂಪಿಸಿದರು. ಸಹಶಿಕ್ಷಕಿ ವಿನುತ ಸ್ವಾಗತಿಸಿ, ಸಹ ಶಿಕ್ಷಕ ರಜತ್ ಭಟ್ ವಂದಿಸಿದರು.