ಶಿಕ್ಷಣದ ಜತೆಗೆ ಕಲೆ, ಸಂಸ್ಕೃತಿ ಮತ್ತು ಪರಂಪರೆಯ ಸಂರಕ್ಷಣೆಗೆ ಆದ್ಯತೆ ನೀಡುತ್ತಿರುವ ಆಳ್ವಾಸ್ನ ಸಾಂಸ್ಕೃತಿಕ ಚಟುವಟಿಕೆಗಳಿಗೆ ಮತ್ತಷ್ಟು ಉತ್ತೇಜನ ನೀಡುವ ನಿಟ್ಟಿನಲ್ಲಿ ಕೋಡ್ ಕ್ರಾಫ್ಟ್ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್ ಮಂಗಳೂರು ಸಂಸ್ಥೆ ತನ್ನ ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ (CSR) ಉಪಕ್ರಮದಡಿ ರೂ. 6.28 ಲಕ್ಷ ಆರ್ಥಿಕ ನೆರವು ನೀಡಿದೆ. ಆಳ್ವಾಸ್ನ ನುಡಿಸಿರಿ ವಿರಾಸತ್ ಸಾಂಸ್ಕೃತಿಕ ತಂಡಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ 628 ವಿದ್ಯಾರ್ಥಿಗಳಿಗೆ ತಲಾ ರೂ. 1,000ರಂತೆ ಒಟ್ಟು ರೂ. 6,28,000 ನೆರವನ್ನು ನೀಡಲಾಗಿದ್ದು, ಸಾಂಕೇತಿಕವಾಗಿ ಕೆಲವು ವಿದ್ಯಾರ್ಥಿಗಳಿಗೆ ನೆರವಿನ ಮೊತ್ತವನ್ನು ಕಾರ್ಯಕ್ರಮದಲ್ಲಿ ಹಸ್ತಾಂತರಿಸಲಾಯಿತು. ಆಳ್ವಾಸ್ ಕಾಲೇಜಿನ ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ ಮೋಹನ ಆಳ್ವ ಮಾತನಾಡಿ, ಕೋಡ್ ಕ್ರಾಫ್ಟ್ ಟೆಕ್ನಾಲಜೀಸ್ನ ಸಿ.ಎಸ್.ಆರ್ ಉಪಕ್ರಮವನ್ನು ಶ್ಲಾಘಿಸಿ, ಕಲೆ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಸಂಸ್ಥೆಯು ನೀಡುತ್ತಿರುವ ಬೆಂಬಲವು ಶ್ಲಾಘನೀಯ. ಸಮಾಜದಲ್ಲಿ ಸಂಪತ್ತು ಹೊಂದಿರುವವರು ತಮ್ಮ ಸಂಪತ್ತಿನ ಒಂದು ಭಾಗವನ್ನು ಸಮಾಜದ ಒಳಿತಿಗಾಗಿ ವಿನಿಯೋಗಿಸುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದರು. ಕಲೆ ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳೆಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಹಿಂದಿನ ಕಾಲದಲ್ಲಿ ಗುರು ಶಿಷ್ಯ ಪರಂಪರೆಯ ಮೂಲಕ ವಿವಿಧ ಕಲೆಗಳನ್ನು ಕಲಿತು ಕಲಾವಿದರಾಗುವ ಅವಕಾಶವಿತ್ತು. ಆದರೆ ಆ ಪರಂಪರೆ ಇಂದು ನಿಧಾನವಾಗಿ ಮರೆಯಾಗುತ್ತಿದೆ. ಕಲೆಗಳನ್ನು ಉಳಿಸಿ ಮುಂದಿನ ಪೀಳಿಗೆಗೆ ಪರಿಚಯಿಸುವ ಕಾರ್ಯ ನಿರಂತರವಾಗಿ ನಡೆಯಬೇಕು ಎಂದರು.
ಕಲೆ ಜಾತಿ, ಧರ್ಮ, ಲಿಂಗ ಅಥವಾ ಯಾವುದೇ ಭೇದವನ್ನು ಮೀರಿ ಮಾನವೀಯತೆಯನ್ನು ಬೆಸೆಯುವ ಶಕ್ತಿಯನ್ನು ಹೊಂದಿದೆ. ಜೀವನದೊಂದಿಗೆ ಜನಪದ ಕಲೆಗಳು ಬೆರೆತಾಗ ಜನರಲ್ಲಿ ಸೃಜನಶೀಲತೆ ಹೆಚ್ಚುತ್ತದೆ. ಇದೇ ರೀತಿಯಲ್ಲಿ ಕಲೆಗಳನ್ನು ಮುಂದುವರಿಸಿಕೊಂಡು ಹೋದರೆ ಭಾರತದಲ್ಲಿ ಜನಪದ ಹಾಗೂ ಸಾಂಪ್ರದಾಯಿಕ ಕಲೆಗಳಿಗೆ ಉಜ್ವಲ ಭವಿಷ್ಯವಿದೆ ಎಂದರು. ಸಾಂಸ್ಕೃತಿಕ ಚಟುವಟಿಕೆಗಳು ವಿದ್ಯಾರ್ಥಿಗಳ ಪ್ರತಿಭೆ ಹಾಗೂ ಅಭಿವ್ಯಕ್ತಿಯನ್ನು ಅನಾವರಣಗೊಳಿಸುವ ವೇದಿಕೆಯಾಗಿದ್ದು, ದೇಶದ ವಿವಿಧ ಸಂಸ್ಕೃತಿಗಳನ್ನು ಅರಿಯುವ ಮತ್ತು ಪರಿಚಯಿಸುವ ಅವಕಾಶವನ್ನೂ ಒದಗಿಸುತ್ತವೆ. ವಿದ್ಯಾರ್ಥಿಗಳು ಇಂದು ಅನುಭವಿಸುತ್ತಿರುವ ಪರಿಶ್ರಮ ಮತ್ತು ಶಿಸ್ತು ಅವರ ಮುಂದಿನ ಸಾಧನೆಗೆ ಬುನಾದಿಯಾಗಲಿದೆ. ಪ್ರತಿಯೊಬ್ಬರೂ ತಮ್ಮ ಗುರಿಯತ್ತ ನಿರಂತರವಾಗಿ ಶ್ರಮಿಸಬೇಕು ಎಂದು ಅವರು ಕರೆ ನೀಡಿದರು.




ಕಾರ್ಯಕ್ರಮದಲ್ಲಿ ಕೋಡ್ಕ್ರಾಫ್ಟ್ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್ನ ಸಂಸ್ಥಾಪಕ ಹಾಗೂ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ದೀಕ್ಷಿತ್ ರೈ ಮಾತನಾಡಿ, ಜೀವನದಲ್ಲಿ ಯಶಸ್ಸು ಸಾಧಿಸಲು ಕಠಿಣ ಪರಿಶ್ರಮಕ್ಕೆ ಪರ್ಯಾಯವಿಲ್ಲ. ಪ್ರತಿಯೊಬ್ಬರ ಜೀವನದಲ್ಲಿಯೂ ಯಶಸ್ಸಿನ ಅವಕಾಶಗಳು ಒಮ್ಮೆ ಎದುರಾಗುತ್ತವೆ. ಅಂತಹ ಸಂದರ್ಭದಲ್ಲಿ ತಮ್ಮ ಸಾಮರ್ಥ್ಯವನ್ನು ಪರಿಣಾಮಕಾರಿಯಾಗಿ ಪ್ರದರ್ಶಿಸುವ ಮೂಲಕ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು. ಕೆಲವೊಮ್ಮೆ ಕಠಿಣ ಪರಿಶ್ರಮದ ನಡುವೆಯೂ ನಿರೀಕ್ಷಿತ ಫಲಿತಾಂಶ ದೊರೆಯದಿರಬಹುದು. ಅಂತಹ ಸಂದರ್ಭಗಳಲ್ಲಿ ನಿರಾಶರಾಗದೆ ಮತ್ತಷ್ಟು ಪ್ರಯತ್ನಿಸುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಅವರು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು. ವಿದ್ಯಾರ್ಥಿಗಳ ಪ್ರತಿಭೆ ಮತ್ತು ಪರಿಶ್ರಮಕ್ಕೆ ಬೆಂಬಲ ನೀಡುವುದು ಸಮಾಜದ ಜವಾಬ್ದಾರಿಯೂ ಹೌದು. ಈ ನಿಟ್ಟಿನಲ್ಲಿ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ವಿದ್ಯಾರ್ಥಿಗಳಿಗೆ ಸಿ.ಎಸ್.ಆರ್ ನೆರವು ನೀಡುತ್ತಿರುವುದು ಸಂತಸದ ಸಂಗತಿ ಎಂದು ಅವರು ಹೇಳಿದರು.

ಕಾರ್ಯಕ್ರಮದಲ್ಲಿ ಕೋಡ್ಕ್ರಾಫ್ಟ್ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್ನ ಸಂಸ್ಥಾಪಕ ಹಾಗೂ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ದೀಕ್ಷಿತ್ ರೈಯವರನ್ನು ಗೌರವಿಸಲಾಯಿತು. ಸಂಸ್ಥೆಯ ಕಾರ್ಯಾಚರಣೆಗಳ ಮುಖ್ಯಸ್ಥ ಜೋಬಿನ್ ಜೋಸೆಫ್, ಆಳ್ವಾಸ್ ನ ಉದ್ಯಮಶೀಲತೆ ಅಭಿವೃದ್ಧಿ ಘಟಕದ ಮುಖ್ಯಸ್ಥ ವೇಣು ರಾವ್ ದೇವಾ ಉಪಸ್ಥಿತರಿದ್ದರು. ಕಲಾ ವಿಭಾಗದ ಮುಖ್ಯಸ್ಥ ವೇಣುಗೋಪಾಲ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.












































































































