ಇರ್ದೆ ಬೆಟ್ಟಂಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ, ಹಿರಿಯ ಸಹಕಾರಿ ಧುರೀಣ ಶಶಿಕುಮಾರ್ ರೈ ಬಾಲ್ಯೊಟ್ಟುರವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಇರ್ದೆ ಗ್ರಾಮದ ಬಾಲ್ಯೊಟ್ಟು ನಿವಾಸಿಯಾಗಿರುವ ಶಶಿಕುಮಾರ್ ರೈರವರು ಪುತ್ತೂರು ಅಭಿವೃದ್ಧಿ ಬ್ಯಾಂಕಿನ ನಿರ್ದೇಶಕರಾಗಿ, ಉಪಾಧ್ಯಕ್ಷರಾಗಿ, ಎಂಟು ವರ್ಷ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜನ ಜಾಗೃತಿ ವೇದಿಕೆಯ ಪುತ್ತೂರು ತಾಲೂಕು ಸಮಿತಿ ಅಧ್ಯಕ್ಷರಾಗಿ, ಇರ್ದೆ ಹಾಗೂ ಬೆಟ್ಟಂಪಾಡಿ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ, ಬೆಂದ್ರತೀರ್ಥ ಅಭಿವೃದ್ಧಿ ಸಮಿತಿಯ ಸಂಚಾಲಕರಾಗಿ, ಪೇರ್ಲತ್ತಡ್ಕ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾಗಿ, ಇರ್ದೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಮೊಕ್ತೇಸರರಾಗಿ, ನಿಡ್ಪಳ್ಳಿ ಶ್ರೀ ಶಾಂತಾದುರ್ಗಾ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ಸಂಚಾಲಕರಾಗಿ, ಸಾರ್ವಜನಿಕ ಶಾರದೋತ್ಸವ ಸಮಿತಿಯಲ್ಲಿ 23 ವರ್ಷ ಅಧ್ಯಕ್ಷರಾಗಿ, ಪುತ್ತೂರು ಸಂತ ಫಿಲೋಮಿನಾ ಕಾಲೇಜಿನ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಾಗಿ, ಉಪ್ಪಿನಂಗಡಿ ವಿಜಯ -ವಿಕ್ರಮ ಜೋಡು ಕರೆ ಕಂಬಳ ಸಮಿತಿಯ ಸಂಚಾಲಕರಾಗಿ, ಪುತ್ತೂರು ತಾಲೂಕು ಯುವ ಬಂಟರ ಸಂಘದ ಸ್ಥಾಪನಾ ಸಮಿತಿ ಕೋಶಾಧಿಕಾರಿಯಾಗಿ, ಪುತ್ತೂರು ತಾಲೂಕು ಬಂಟರ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.
ಪ್ರಸ್ತುತ ಪುತ್ತೂರು ಸೌಹಾರ್ದ ಸಹಕಾರಿಯ ಉಪಾಧ್ಯಕ್ಷರಾಗಿ, ಪುತ್ತೂರು ಟಿ.ಎ.ಪಿ.ಎಂ.ಎಸ್ ನ ನಿರ್ದೇಶಕರಾಗಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನಲ್ಲಿ ಮೂರನೇ ಬಾರಿಗೆ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.