ಯಕ್ಷಗಾನ ಕ್ಷೇತ್ರದ ಚರಿತ್ರ ನಟ, ರಾಜ್ಯ- ರಾಷ್ಟ್ರ ಪ್ರಶಸ್ತಿ ಪುರಸ್ಕೃತರಾದ ಮೇರು ಕಲಾವಿದ ದಿ| ಅಳಿಕೆ ರಾಮಯ್ಯ ರೈ ಅವರ ಹೆಸರಿನಲ್ಲಿ ಬೆಂಗಳೂರಿನ ಅಳಿಕೆ ರಾಮಯ್ಯ ರೈ ಸ್ಮಾರಕ ಟ್ರಸ್ಟ್ ಪ್ರತಿ ವರ್ಷ ನೀಡುವ ಅಳಿಕೆ ಯಕ್ಷ ಸಹಾಯ ನಿಧಿಗೆ 2024 – 25 ನೇ ಸಾಲಿಗೆ ಹಿರಿಯ ಯಕ್ಷಗಾನ ಕಲಾವಿದ, ತೆಂಕುತಿಟ್ಟಿನ ಬಣ್ಣದ ವೇಷಧಾರಿ ಸಿದ್ಧಕಟ್ಟೆ ಸದಾಶಿವ ಶೆಟ್ಟಿಗಾರ್ ಆಯ್ಕೆಯಾಗಿದ್ದಾರೆ. ಯಕ್ಷಗಾನ ವಿದ್ವಾಂಸರಾದ ಡಾ. ಎಂ.ಪ್ರಭಾಕರ ಜೋಶಿ, ಪ್ರೊ. ಭಾಸ್ಕರ ರೈ ಕುಕ್ಕುವಳ್ಳಿ ಮತ್ತು ಹಿರಿಯ ಕಲಾವಿದ ಉಬರಡ್ಕ ಉಮೇಶ ಶೆಟ್ಟಿ ಅವರನ್ನೊಳಗೊಂಡ ಸಲಹಾ ಸಮಿತಿಯ ಸೂಚನೆಯಂತೆ ಸಂಕಷ್ಟದಲ್ಲಿರುವ ಯಕ್ಷಗಾನ ಕಲಾವಿದ ಸದಾಶಿವ ಶೆಟ್ಟಿಗಾರ್ ಅವರಿಗೆ ಸಹಾಯ ನಿಧಿ ನೀಡಲಾಗುವುದು ಎಂದು ಅಳಿಕೆ ರಾಮಯ್ಯ ರೈ ಪುತ್ರ ಹಾಗೂ ಟ್ರಸ್ಟ್ ಸಂಚಾಲಕ ಅಳಿಕೆ ದುರ್ಗಾ ಪ್ರಸಾದ್ ರೈ ಅವರು ಮೇ 15 ರಂದು ನಗರದ ಪತ್ರಿಕಾ ಭವನದಲ್ಲಿ ಜರಗಿದ ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಟ್ರಸ್ಟ್ ಸಲಹಾ ಸಮಿತಿ ಸಂಚಾಲಕ ಪ್ರೊ. ಭಾಸ್ಕರ ರೈ ಕುಕ್ಕುವಳ್ಳಿ ಮಾತನಾಡಿ, ‘2025 ಮೇ19 ರಂದು ಸೋಮವಾರ ಪ್ರಸ್ತುತ ತೀವ್ರ ಅನಾರೋಗ್ಯದಿಂದಾಗಿ ಚಿಕಿತ್ಸೆ ಪಡೆಯುತ್ತಿರುವ ಸಿದ್ಧಕಟ್ಟೆ ಸದಾಶಿವ ಶೆಟ್ಟಿಗಾರ್ ಅವರ ಸಿದ್ಧಕಟ್ಟೆಯ ನಿವಾಸಕ್ಕೆ ತೆರಳಿ ಗೃಹ ಸಮ್ಮಾನದೊಂದಿಗೆ ರೂ. 20,000/- ನಿಧಿ ಸಮರ್ಪಣೆ ಮಾಡಲಾಗುವುದು. ಈ ವೇಳೆ ಸಲಹಾ ಸಮಿತಿ ಸದಸ್ಯರು ಮತ್ತು ಟ್ರಸ್ಟ್ ಪದಾಧಿಕಾರಿಗಳು ಉಪಸ್ಥಿತರಿರುವರು’ ಎಂದು ತಿಳಿಸಿದರು. ಅಳಿಕೆ ರಾಮಯ್ಯ ರೈ ಸ್ಮಾರಕ ಟ್ರಸ್ಟ್ ಸದಸ್ಯರಾದ ಉಮೇಶ್ ಶೆಟ್ಟಿ ಉಬರಡ್ಕ, ಮಹಾಬಲ ರೈ ಬಜನಿ ಗುತ್ತು ಮತ್ತು ಲಕ್ಷ್ಮೀನಾರಾಯಣ ರೈ ಹರೇಕಳ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
