ಅಮ್ಮನ ನೆರವು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಹತ್ತನೇ ತರಗತಿ ಮತ್ತು ಪಿಯುಸಿ ಪಾಸಾದ 90 ಶೇಕಡಾಕ್ಕಿಂತ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡುವ ಕಾರ್ಯಕ್ರಮವು ಟ್ರಸ್ಟಿನ ಅಧ್ಯಕ್ಷ ಅವಿನಾಶ್ ವಿ ಶೆಟ್ಟಿಯವರ ನೇತೃತ್ವದಲ್ಲಿ ಕಾರ್ಕಳ ಸುಂದರ ಪುರಾಣಿಕ ಸ್ಮಾರಕ ಸರಕಾರಿ ಪ್ರೌಢಶಾಲೆ ಪೆರವಾಜೆ ಇಲ್ಲಿ ನಡೆಯಿತು. ವಿದ್ಯಾಭಿಮಾನಿಗಳೂ ಹಿರಿಯರೂ ಆದ ವೈಕುಂಟ ಶೆಣೈ ಜ್ಯೋತಿ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷ ಆನಂದ ನಾಯಕ್ ರವರು ವಿದ್ಯಾರ್ಥಿಗಳು ಮುಂದಿನ ವರ್ಷ ಇದಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿವೇತನವನ್ನು ಪಡೆಯುವಲ್ಲಿ ಪ್ರಯತ್ನಿಸಿ ಎಂದು ಶುಭ ಹಾರೈಸಿದರು.

ಕಾರ್ಯಕ್ರಮದ ಮುಖ್ಯ ಅತಿಥಿ ಕಾರ್ಕಳ ರೋಟರಿ ಕ್ಲಬ್ಬಿನ ಅಧ್ಯಕ್ಷ ನವೀನ್ ಚಂದ್ರ ಶೆಟ್ಟಿ ಮಾತನಾಡುತ್ತಾ, ಅವಿನಾಶ್ ವಿ ಶೆಟ್ಟಿಯವರು ತನ್ನ ಸಣ್ಣ ಪ್ರಾಯದಲ್ಲೇ ಇಂಥಹ ಉತ್ತಮ ಕಾರ್ಯಕ್ರಮಗಳನ್ನು ಮಾಡಲು ಅಮ್ಮನಿಂದ ಬಂದ ಉತ್ತಮ ಸಂಸ್ಕಾರಗಳೇ ಕಾರಣ. ಜೊತೆಗೆ ಅವರು ಓರ್ವ ಉತ್ತಮ ದೇಶಭಕ್ತಿಯನ್ನು ಮೈಗೂಡಿಸಿಕೊಂಡವರು ಎಂದರು.
ಡಾ. ರವಿರಾಜ್ ಶೆಟ್ಟಿ, ಮಸ್ಕತ್ತಿನ ಉದ್ಯಮಿ ರಾಜೇಂದ್ರ ಶೆಟ್ಟಿ ನಲ್ಲೂರು, ಸೌದಿಯಲ್ಲಿ ಎಲೆಕ್ಟ್ರಿಕಲ್ ಇಂಜಿನಿಯರ್ ಆಗಿರುವ ಚೇತನ್ ಕುಮಾರ್, ಉದ್ಯಮಿ ಸುಧಾಕರ ಶೆಟ್ಟಿ, ಸಮಾಜ ಸೇವಕ ಜೇಸಿ ಸಮದ್ ಖಾನ್, ಶ್ರೀ ರಾಮಪ್ಪ ಎಜುಕೇಶನ್ ಟ್ರಸ್ಟಿನ ಅಧ್ಯಕ್ಷ ಶ್ರೀಧರ್ ಸುವರ್ಣ, ಕಾರ್ಕಳ ಜೇಸಿ ಸಂಸ್ಥೆಯ ಅಧ್ಯಕ್ಷೆ ಶ್ವೇತಾ ಜೈನ್ ವೇದಿಕೆಯಲ್ಲಿ ಉಪಸ್ಥಿತರಿದ್ದು ಶುಭ ಹಾರೈಸಿದರು. ಈ ಸಂದರ್ಭದಲ್ಲಿ 10ನೇ ತರಗತಿ ಪಾಸಾದ 22 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಹಾಗೂ ಉನ್ನತ ಶಿಕ್ಷಣ ಪಡೆಯುತ್ತಿರುವ 4 ವಿದ್ಯಾರ್ಥಿಗಳಿಗೆ ಆರ್ಥಿಕ ಸಹಾಯ ನೀಡಲಾಯಿತು.
ಸಂಗೀತ ಶಿಕ್ಷಕ ಕೃಷ್ಣಪ್ಪ ಮತ್ತು ವಿದ್ಯಾರ್ಥಿಗಳ ತಂಡ ಪ್ರಾರ್ಥಿಸಿದರು. ಕಾರ್ಯಕ್ರಮ ನಿರೂಪಿಸಿದ ಟ್ರಸ್ಟಿನ ಮಾರ್ಗದರ್ಶಕ ವಸಂತ್ ಎಂ. ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಪ್ರಭಾರ ಮುಖ್ಯ ಶಿಕ್ಷಕಿ ವೇದಾವತಿ ವಂದಿಸಿದರು.